ಭಾರತೀಯ ಚಿತ್ರರಂಗದಲ್ಲೇ ಕನ್ನಡ ಚಿತ್ರರಂಗ ದೊಡ್ಡ ಹೆಸರು ಮಾಡಿದೆ. ಇಲ್ಲಿನ ನಟರು ಒಳ್ಳೊಳ್ಳೆ ಸಿನಿಮಾಗಳ ಮೂಲಕ ಇಡೀ ಚಿತ್ರರಂಗವನ್ನೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಆದ್ರೆ ಬೆಂಗಳೂರಿನಲ್ಲಿ ನಡೆಯುತ್ತಿರುವ 18ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಗೆ ಕನ್ನಡ ಚಿತ್ರರಂಗದ ಹಲವರು ಹಾಜರಾಗದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದರು. "ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ" ಎಂದು ಖಾರವಾಗಿ ಮಾತನಾಡಿರುವುದು ಈಗ ವಿವಾದಕ್ಕೆ ಗುರಿಯಾಗಿದೆ ಮತ್ತು ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೇವಲ ರಾಜಕೀಯ ಪಕ್ಷಗಳ ನಡುವೆ ಮಾತ್ರವಲ್ಲ.. ಕನ್ನಡ ಚಿತ್ರರಂಗದ ಕಲಾವಿದರೂ ಕೂಡ ಡಿಕೆಶಿ ಮಾತಿಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಲಾವಿದರ ನಟ್ಟು ಬೋಲ್ಟು ಟೈಟ್ ಮಾಡೋದು ಗೊತ್ತಿದೆ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ವಿಪಕ್ಷಗಳು ಕಿಡಿಕಾರಿವೆ. ಡಿ.ಕೆ.ಶಿವಕುಮಾರ್ ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಹೇಳಲಾಗದ ಮಾತನ್ನು ಸಿನಿಮಾ ಇಂಡಸ್ಟ್ರಿಯವರಿಗೆ ಹೇಳಿ ತೀರಿಸಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದಬ್ಬಾಳಿಕೆ ದೌರ್ಜನ್ಯಕ್ಕೆ ಅವಕಾಶ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಬೋಲ್ಟೇ ಇಲ್ಲ, ಟೈಟ್ ಮಾಡಿ ಏನು ಪ್ರಯೋಜನ?
ಕಲಾವಿದರು ಒಟ್ಟುಗೂಡಬೇಕು ಎಂದೇ ಡಾ.ರಾಜ್ಕುಮಾರ್ ಅವರು ಕಲಾವಿದರ ಸಂಘ ಮಾಡಿದ್ದರು. ದೌರ್ಭಾಗ್ಯ, ಅದು ಇಂದು ನಿಷ್ಕ್ರಿಯಗೊಂಡಿದೆ. ಕೂಡಲೇ ನಿಮ್ಮ ಅಧಿಕಾರಿಗಳಿಗೆ ಸೂಚಿಸಿ ಎಲೆಕ್ಷನ್ ಮಾಡಿಸಿ. ಕಲಾವಿದರು
ಒಂದೆಡೆ ಕೂರುವಂತೆ ಮಾಡಿ. ಒಗ್ಗಟ್ಟು ಇರುವ ಮನೆ ಹಾಳಾದ ನಿದರ್ಶನವಿಲ್ಲ. ಚಿತ್ರರಂಗದ ಸಮಸ್ಯೆಗಳು ಕೂಡ ಅನೇಕ. ಇದನ್ನು ನಿಮ್ಮ ಗಮನಕ್ಕಾಗಿ ತಂದಿರುವೆ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಜಗ್ಗೇಶ್ ಹೇಳಿದ್ದಾರೆ.
ಇನ್ನು ಈ ಕಾರ್ಯಕ್ರಮ 7 ಗಂಟೆಗೆ, ನನಗೆ ಆಹ್ವಾನ ಪತ್ರಿಕೆ ತಲುಪಿದ್ದು 6 ಗಂಟೆಗೆ, ಜೊತೆಗೆ ಒಗಟ್ಟಿಲ್ಲ ಸಂವಾದವಿಲ್ಲ. ಒಟ್ಟಾರೆ ಕಲಾವಿದರ ಸಂಘವೇ ಕಣ್ಮರೆ. ಕರ್ನಾಟಕದಲ್ಲೇ ಕನ್ನಡ ಚಿತ್ರರಂಗದ ಅವಸಾನ ಕಂಡುಬರುತ್ತಿದೆ. ಯಾವ ಕಲಾವಿದರು ಏನಾಗಿದ್ದಾರೆ? ಕಲಾವಿದರಾದ ನಮಗೆ ಮಾಹಿತಿಯಿಲ್ಲ? ಇನ್ನು ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೇ ಇಲ್ಲ, ಇನ್ನು ಟೈಟ್ ಮಾಡಿ ಏನು ಪ್ರಯೋಜನ? ಎಂದು ಜಗ್ಗೇಶ್ ಪ್ರಶ್ನಿಸಿದ್ದಾರೆ.














