ಬೆಂಗಳೂರು : ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಆರೋಪದಲ್ಲಿ ಬಿಗ್ಬಾಸ್ ಮನೆಯಿಂದ ಬಂಧನವಾಗಿರುವ ಹಳ್ಳಿಕಾರ್ ಒಡೆಯ ಖ್ಯಾತಿಯ ವರ್ತೂರ್ ಸಂತೋಷ್ ಅವರು ಅರಣ್ಯ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. 3 ವರ್ಷಗಳ ಹಿಂದೆ ತಮಿಳುನಾಡಿನ ವ್ಯಕ್ತಿಯೊಬ್ಬರಿಂದ ಹುಲಿ ಉಗುರು ಖರೀದಿ ಮಾಡಿದ್ದೆ. ಆದರೆ ಅದನ್ನು ಧರಿಸುವುದು ತಪ್ಪೆಂದು ತಿಳಿದಿರಲಿಲ್ಲ ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ತನಿಖೆಯ ನಂತರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಚಾರ್ಜ್ ಶೀಟ್ ಸಲ್ಲಿಕೆ ನಂತರ ಸಾಕ್ಷಿಗಳನ್ನು ಒದಗಿಸಲಾಗುತ್ತದೆ. ಹೀಗೆ ಪ್ರಕರಣದಲ್ಲಿ ಹುಲಿ ಉಗುರು ಧರಿಸಿರುವುದು ಮತ್ತು ಹೇಗೆ ಸಿಕ್ಕಿತು ಎಂಬ ಬಗ್ಗೆ ಸಾಬೀತಾದ್ರೆ 3 ವರ್ಷದಿಂದ 7 ವರ್ಷದವರಗೆ ಸಂತೋಷ್ಗೆ ಶಿಕ್ಷೆಯಾಗುವ ಸಾಧ್ಯತೆ ಇದೆ.
ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ಬಂಧನವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ
ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ಜ್ ನಿವಾಸಕ್ಕೆ ಕರೆದೊಯ್ದು ಸಂತೋಷ್ರನ್ನು ಹಾಜರು ಪಡಿಸಲಾಯ್ತು.















