ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದ ಇಲ್ಲಿನ ಬಿ.ಸಿ.ರೋಡು ಕೈಕುಂಜೆ ರೈಲ್ವೆ ನಿಲ್ದಾಣವು ಕೇಂದ್ರ ಸರ್ಕಾರದ ಅಮೃತ ಭಾರತ್ ಯೋಜನೆಯಡಿ ರೂ 28.49 ಕೋಟಿ ವೆಚ್ಚದಲ್ಲಿ ಹೊಸ ವಿನ್ಯಾಸದೊಂದಿಗೆ ಪುನರ್ ನಿರ್ಮಾಣಗೊಂಡಿದೆ. ಕಳೆದ 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ರೈಲು ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈಗಾಗಲೇ ಮೊದಲ ಹಂತದ ಕಾಮಗಾರಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಸಾಧ್ಯತೆ ಕಂಡು ಬಂದಿದೆ.
ಇಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಸೇರಿದಂತೆ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಶೌಚಾಲಯ, ಕೆಫೆಟೇರಿಯಾ, ನಾಲ್ಕು ಕ್ಯಾಟರಿಂಗ್ ಸ್ಟಾಲ್ ನಿರ್ಮಾಣಗೊಳ್ಳುತ್ತಿದೆ. ಇಲ್ಲಿನ ಕೆಲೆವೆಡೆ ಗ್ರಾನೈಟ್ ನೆಲಹಾಸು, ಇನ್ನೂ ಕೆಲವೆಡೆ ಕಾಂಕ್ರೀಟು ಮತ್ತು ಟೈಲ್ಸ್ ಅಳವಡಿಸಲಾಗಿದೆ. ಈ ನಿಲ್ದಾಣದ ಉದ್ದಕ್ಕೂ ಸಿಸಿಟಿವಿ ಅಳವಡಿಕೆ, ವೈಫೈ ಸೌಲಭ್ಯ ಒದಗಿಸುವುದು, ಎಲ್.ಇ.ಡಿ. ಪರದೆ ಮೂಲಕ ರೈಲು ಸಂಚಾರ ಮತ್ತು
ಸಮಯಗಳ ಬಗ್ಗೆ ಮಾಹಿತಿ, ಮುಖ್ಯದ್ವಾರ ವೃತ್ತಾಕಾರವಾಗಿ ವಿನ್ಯಾಸಗೊಳಿಸಿ ಪ್ರಯಾಣಿಕರ ಗಮನ ಸೆಳೆಯುತ್ತಿದೆ. ಈಗಾಗಲೇ ರೈಲು ನಿಲ್ದಾಣದ ವಿದ್ಯುದೀಕರಣ, ಹಳಿ ದಾಟಲು ಮೇಲ್ಸೇತುವೆ ನಿರ್ಮಾಣಗೊಂಡಿದ್ದು, ಸುರಕ್ಷತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇದರಿಂದಾಗಿ ಕಿಡಿಗೇಡಿಗಳು ಬಂದು ಗಾಂಜಾ ಮಾರಾಟ ಮತ್ತಿತರ ಸಮಾಜಘಾತುಕ ಚಟುವಟಿಕೆ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಹೆಚ್ಚಿನ ಬಲ ಬಂದಿದೆ ಎಂಬ ಮಾತು ಸ್ಥಳೀಯರಿಂದ ವ್ಯಕ್ತವಾಗಿದೆ














