ಬಂಟ್ವಾಳ: ಜ.8 ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತಿಭಾವಂತರಾಗಬೇಕು. ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಬೇಕು. ರಾಷ್ಟ್ರೀಯ ಮನೋಭಾವನೆಯನ್ನು ಬೆಳೆಸಿಕೊಳ್ಳಲು ಹಿರಿಯರಿಂದ ಸೂಕ್ತ ಮಾರ್ಗದರ್ಶನ ಪಡೆಯಬೇಕು ಎಂದು ಲಯನ್ಸ್ 317 ಡಿ ಜಿಲ್ಲಾ ರಾಜ್ಯಪಾಲ ಗವರ್ನರ್ ಕುಡ್ಪಿ ಅರವಿಂದ ಶೆಣೈ ಹೇಳಿದರು.
ಅವರು ಬಂಟ್ವಾಳ ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಬಂಟ್ವಾಳ ಲಯನ್ಸ್ ಕ್ಲಬ್ ವತಿಯಿಂದ ಏರ್ಪಡಿಸಲಾದ ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ರೋಹಿತಾಶ್ವ ಭಂಗ ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಸೇವಾ ಟ್ರಸ್ಟ್ ಕ್ಲಬ್ ಮಾಜಿ ಅಧ್ಯಕ್ಷ ಶಿವಾನಂದ ಬಾಳಿಗ ಶುಭ
ಹಾರೈಸಿದರು. ಕೋಶಾಧಿಕಾರಿ ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
ಜೇಸಿ ಸಂಸ್ಥೆಯ ತರಬೇತುದಾರರಾದ ಬಿ.ರಾಮಚಂದ್ರ ರಾವ್ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ತರಬೇತಿ ನೀಡಿದರು. ಉಪನ್ಯಾಸಕ ಜಯಾನಂದ ಪೆರಾಜೆ ಸಹಕರಿಸಿದರು.
ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿದರು. ಉಪನ್ಯಾಸಕರಾದ ವೆಂಕಟೇಶ ನಾಯಕ್ ,ಮಂಜುನಾಥ ಶೆಣೈ, ಅಲೆನ್ ರೆಬೆಲ್ಲೋ, ಉಪನ್ಯಾಸಕಿ ರಶ್ಮಿ ಉಪಸ್ಥಿತರಿದ್ದರು.










