ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಆದೇಶ ಪ್ರಶ್ನಿಸಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಮಯೂರ್ ಉಲ್ಲಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚಿಗೆ ಈ ಆದೇಶ ಹೊರಡಿಸಿದೆ. ಸಂಘದ 2024-26ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆಗೆ
2024ರ ನವಂಬರ್ 10ರಂದು ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಅಸಿಂಧುಗೊಳಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರು 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಹಾಲಿ ಕಾರ್ಯಕಾರಿ ಸಮಿತಿಯು ಮುಂದುವರಿಯಲಿ ಎಂದು ನವಂಬರ್ 20ರಂದು ಆದೇಶ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.















