ಬಂಟ್ವಾಳ: ಗ್ರಾಮೀಣ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಸಹಕಾರಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಬ್ರಹ್ಮರಕೂಟ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷಗಲ್ಲಿಳ ಕೋವಿಡ್ 19 ಸಂಕಷ್ಟದಿಂದಾಗಿ ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ದೊರೆತಿರಲಿಲ್ಲ. ವಿದೇಶಗಳಲ್ಲಿ ಇನ್ನೂ ಕೋವಿಡ್ 19 ಬಿಗಿನಿಯಮಾವಳಿಗಳು ಚಾಲ್ತಿಯಲ್ಲಿದ್ದರೂ, ಭಾರತದಲ್ಲಿ ಯಶಸ್ವಿಯಾಗಿ 180 ಕೋಟಿ ಡೋಸ್ ಲಸಿಕೆ ವಿತರಿಸಿದ ಪರಿಣಾಮ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಹಾಗಾಗಿ ಶಿಕ್ಷಣ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ ಎಂದರು.
ಬೆಳಿಗ್ಗೆ ಮೈದಾನದಲ್ಲಿ ವಿದ್ಯಾರ್ಥಿಗಳಿಂದ
ಕವಾಯತ್ ಹಾಗೂ ನೃತ್ಯಪ್ರದರ್ಶನ ನಡೆಯಿತು. ಬಳಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಮಧ್ಯಾಹ್ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ ರಮಾನಾಥ ರೈ, ಮಾಜಿ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ಜಾರಂದಗುಡ್ಡೆ, ಪಂಚಾಯತ್ ಸದಸ್ಯರಾದ ಮನೋಜ್ ವಳವೂರು, ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ರವಿರಾಜ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉದಯಕುಮಾರ್ ಜ್ಯೋತಿಗುಡ್ಡೆ, ಉಪಾಧ್ಯಕ್ಷೆ ಚಿತ್ರಾಕ್ಷಿ ಜಾರಂದಗುಡ್ಡೆ, ಮುಖ್ಯೋಪಾಧ್ಯಾಯರು, ಮತ್ತಿತರರು ಉಪಸ್ಥಿತರಿದ್ದರು.














