ಬಂಟ್ವಾಳ : ವಿದ್ಯಾವಂತ ಯುವ ಸಮುದಾಯ ಕೃಷಿಯತ್ತ ಹೆಚ್ಚಿನ ಒಲವು ಬೆಳೆಸಿಕೊಳ್ಳಬೇಕು. ಬಾಲ್ಯದಿಂದಲೇ ಕೃಷಿಯ ಬಗ್ಗೆ ಆಸಕ್ತಿ ಮೂಡಿಸಿಕೊಂಡರೆ ಮಾತ್ರ ಕೃಷಿ ಉಳಿಯಲು ಸಾಧ್ಯ. ಕೃಷಿ ಕೀಳಲ್ಲ, ಅದು ಬದುಕು ನೀಡುವ ಕ್ಷೇತ್ರ. ಯುವಕರು ಯಾವುದೇ ಸಂಕೋಚವಿಲ್ಲದೆ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ಹಾಗೂ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಜಂಟಿ ಸಹಭಾಗಿತ್ವದಲ್ಲಿ 2026-27ನೇ ಸಾಲಿನ ಆತ್ಮ ಯೋಜನೆಯಡಿ ಆಯೋಜಿಸಿದ್ದ ಕಿಸಾನ್ ಗೋಷ್ಟಿ, ಇಲಾಖಾ ಸೌಲಭ್ಯ ಹಾಗೂ ಬೆಳೆ ವಿಮೆ, ಬೆಳೆ ಸಮೀಕ್ಷೆ ಮಾಹಿತಿ ಮತ್ತು ಸಾಂಕೇತಿಕ ಇಲಾಖಾ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
"ಅನ್ನದಾತ ದೇವರಿಗೆ ಸಮಾನ" ಎಂಬುದನ್ನು ಸಮಾಜ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ರೈತರು ಕಷ್ಟಪಟ್ಟು ದುಡಿದಾಗ ಮಾತ್ರ ಪ್ರತಿಯೊಬ್ಬರ ಬದುಕು ಸಾಗುತ್ತದೆ. ಕೃಷಿಯನ್ನು ಕೇವಲ ಸಾಂಪ್ರದಾಯಿಕ ವೃತ್ತಿಯಾಗಿ ನೋಡದೆ, ಆಧುನಿಕ ಹಾಗೂ ಲಾಭದಾಯಕ ಉದ್ಯಮವಾಗಿ ಪರಿಗಣಿಸುವ ಅಗತ್ಯವಿದೆ ಎಂದರು.
ಇಂದಿನ ಯುವಜನತೆ ಉದ್ಯೋಗಕ್ಕಾಗಿ ನಗರ ಪ್ರದೇಶಗಳತ್ತ ಮುಖ ಮಾಡುತ್ತಿದೆ. ಆದರೆ ಕೃಷಿಯಲ್ಲಿಯೂ ಉತ್ತಮ ಆದಾಯ ಮತ್ತು ಸ್ವಾವಲಂಬಿ ಬದುಕಿಗೆ ಸಾಕಷ್ಟು ಅವಕಾಶಗಳಿವೆ. ವಿದ್ಯಾವಂತ ಯುವಕರು ಕೃಷಿಯಲ್ಲಿನ ಹೊಸ ತಂತ್ರಜ್ಞಾನ, ವೈಜ್ಞಾನಿಕ ಪದ್ಧತಿ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಅಳವಡಿಸಿಕೊಂಡು ಕೃಷಿಯನ್ನು ಹೊಸ ರೀತಿಯಲ್ಲಿ ಮುನ್ನಡೆಸಬೇಕು ಎಂದು ಕರೆ ನೀಡಿದರು.
ಆಧುನಿಕ ಯಾಂತ್ರಿಕ ಕೃಷಿಗೆ ಒತ್ತು ನೀಡುವ ಅಗತ್ಯವಿದೆ. ಕೃಷಿ ಕಾರ್ಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಸಮಯ ಮತ್ತು ಶ್ರಮ ಉಳಿತಾಯವಾಗುವುದರ ಜತೆಗೆ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯ. ರೈತರು ಕೃಷಿ ಇಲಾಖೆಯ ತಾಂತ್ರಿಕ ಸಲಹೆ ಹಾಗೂ ಸರಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಕೃಷಿಯಲ್ಲಿ ಹೊಸ ಪ್ರಯೋಗಗಳಿಗೆ ಮುಂದಾಗಬೇಕು ಎಂದರು.
ಬೆಳೆ ವಿಮೆ, ಬೆಳೆ ಸಮೀಕ್ಷೆ, ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕೃಷಿ ಆಧಾರಿತ ಸೌಲಭ್ಯಗಳ ಕುರಿತು ರೈತರಿಗೆ ಸಮರ್ಪಕ ಮಾಹಿತಿ ತಲುಪಬೇಕು. ಇಲಾಖೆಯ ಅಧಿಕಾರಿಗಳು ರೈತರೊಂದಿಗೆ
ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕೃಷಿಕರಿಗೆ ಆತ್ಮವಿಶ್ವಾಸ ತುಂಬಬೇಕು ಎಂದು ಶಾಸಕರು ಹೇಳಿದರು.
ಬಂಟ್ವಾಳ ತಾಲೂಕು ರೈತರು ಸಲಹಾ ಸಮಿತಿ ಅಧ್ಯಕ್ಷ ಅಬುಬಕ್ಕರ್ ಅಮ್ಮುಂಜೆ ಮಾತನಾಡಿ, ರೈತರ ಸಹಕಾರದೊಂದಿಗೆ ಕೃಷಿ ಇಲಾಖೆಯ ನೆರವು ಪಡೆದು ರೈತರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. "ಕೆಲಸ ಮಾತನಾಡಬೇಕು ಹೊರತು ಮಾತು ಕೆಲಸ ಮಾಡಬಾರದು" ಎಂಬ ತತ್ವದಡಿ ರೈತರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಮೋದ್ಕುಮಾರ್ ರೈ, ನಿರ್ದೇಶಕ ಪಿ. ಜಿನರಾಜ ಅರಿಗ, ಉಪಾಧ್ಯಕ್ಷ ಅಮ್ಮು ರೈ ಹರ್ಕಾಡಿ, ಬಂಟ್ವಾಳ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು, ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಕೆವಿಕೆ ಮಂಗಳೂರು ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ಹರೀಶ್ ಶೆಣೈ, ವಿಟ್ಲ ಪಶು ವೈದ್ಯಾಧಿಕಾರಿ ಡಾ. ಅವಿನಾಶ್ ಭಟ್, ಕಾವಳಪಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಿವಪ್ಪ ಗೌಡ ನಿನ್ನಿಕಲ್ಲು, ಕಾವಳಪಡೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಚನ್ಕುಮಾರ್ ಹಾಗೂ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಾನಂದ ಗಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೈತರಿಗೆ ಇಲಾಖೆಯ ವಿವಿಧ ಸೌಲಭ್ಯಗಳು, ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಸಂಬಂಧಿತ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ರೈತರಿಗೆ ಸಾಂಕೇತಿಕವಾಗಿ ಇಲಾಖಾ ಸೌಲಭ್ಯಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಸಂಯೋಜಕ ನಂದನ್ ಶೆಣೈ ಸ್ವಾಗತಿಸಿ ವಂದಿಸಿದರು.
















