ಬಂಟ್ವಾಳ :ಮಹಿಳೆಯರ ಮತ್ತು ಮಕ್ಕಳ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಬಹಳಷ್ಷು ಕಾಳಜಿ ವಹಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು ಹೇಳಿದರು.
ಮಾಣಿ ಗ್ರಾಮ ಪಂಚಾಯತ್ತಿನ ವತಿಯಿಂದ ನಡೆದ ಮಹಿಳಾ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದಿಂದ ದೊರೆಯುವ ಪ್ರತಿಯೊಂದು ಸವಲತ್ತುಗಳು ಕೂಡಾ ಮಹಿಳೆಯರಿಗೇ ಬರುತ್ತವೆ. ಮಹಿಳೆಯರು ಇದರ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೇಣುಕಾರವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಪ್ರಮುಖ ಮಾಹಿತಿಯನ್ನು
ನೀಡಿದರು.
ಮಾಣಿ ಗ್ರಾಮ ಪಂಚಾಯತ್ತಿನ ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಮಿತ್ರಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.










