ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಅಂತ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು ಜಿಲ್ಲೆ ಉದ್ವಿಗ್ನಗೊಂಡಿದೆ. ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ, ಬಿಜೆಪಿ ಯುವ
ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್ ನೆಟ್ಟಾರು ಮೃತಪಟ್ಟವರು. ಕೆಲ ದಿನಗಳ ಹಿಂದಷ್ಟೇ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಯುವಕನೊಬ್ಬನ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು ಆಮಾಯಕನ ಕೊಲೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ರಾತ್ರೋರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವ ಮೊದಲು ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರವೀಣ್ ನೆಟ್ಟಾರು ಮೃತದೇಹ ಇರಿಸಲಾಗಿದ್ದ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದ.ಕ. ಎಸ್ಪಿ ಋುಷಿಕೇಶ್ ಸೋನಾವಣೆ ಮಂಗಳವಾರ ರಾತ್ರಿ ಭೇಟಿ ನೀಡಿದರು. ದುರ್ಘಟನೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯ ಮತ್ತು ಕೇರಳ ಗಡಿ ಭಾಗಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ. ಈ ಪರಿಸರದಲ್ಲಿ ನಾಕಾಬಂದಿ ಹಾಕಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
















