ಬಂಟ್ವಾಳ: ಇಲ್ಲಿನ ಬಂಟರ ಸಂಘ ಮತ್ತು ಮುಂಬಯಿ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆ ವತಿಯಿಂದ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ ಒಟ್ಟು 1,750 ಮಂದಿ ಅರ್ಹ ವಿದ್ಯಾರ್ಥಿಗಳಿಗೆ ರೂ 52ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಬಂಟವಾಳ ಬಂಟರ ಭವನದಲ್ಲಿ ಭಾನುವಾರ ನಡೆಯಿತು.
ಮುಂಬೈ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಂಟರ ಸಂಘವು ಕಳೆದ ಹಲವಾರು ವರ್ಷಗಳಿಂದ ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಪರಿಣಾಮ ಪ್ರಸಕ್ತ ಅಪಾರ ಮಂದಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಇದೇ ವೇಳೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಸನ್ಮಾನಿಸಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದ ರೂ 50ಲಕ್ಷ ಅನುದಾನ ದೊರಕಿಸಿ ಕೊಡುವಂತೆ ಮನವಿ ಸಲ್ಲಿಸಿದರು. ಬಂಟರ ಸಂಘದ ಪೂರ್ವದ್ಯಕ್ಷ ಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.
ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ವಲಯ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ,
ಶಾಸಕರಾದ ಗುರುರಾಜ್ ಗಂಟಿಹೊಳೆ, ಬಿ.ಮಂಜುನಾಥ ಭಂಡಾರಿ, ಭಾರತಿ ಶೆಟ್ಟಿ, ಗುರ್ಮೆ ಸುರೇಶ ಶೆಟ್ಟಿ, ಡಾ.ವೈ.ಭರತ್ ಶೆಟ್ಟಿ, ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಅಶೋಕ್ ರೈ ಪುತ್ತೂರು, ಹರೀಶ ಪೂಂಜ ಇವರನ್ನು ಸನ್ಮಾನಿಸಲಾಯಿತು.
ಆಲ್ ಕಾರ್ಗೋ ಲಾಜೆಸ್ಟಿಕ್ಸ್ ಸಂಸ್ಥೆ ಹಿರಿಯ ಪ್ರಧಾನ ವ್ಯವಸ್ಥಾಪಕ ಡಾ.ನೀಲ್ ರತನ್ ಶೆಂಡೆ ಮಾತನಾಡಿ, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಉದ್ಯೋಗ ಪಡೆದ ಬಳಿಕ ಶೈಕ್ಷಣಿಕ ನೆರವು ನೀಡಬೇಕು ಎಂದರು.
ಸಂಘದ ಪ್ರಮುಖರಾದ ಲೋಕೇಶ್ ಶೆಟ್ಟಿ, ಪ್ರತಿಭಾ ಎ.ರೈ., ರಂಜನ್ ಕುಮಾರ್ ಶೆಟ್ಟಿ, ಮಹಿಳಾ ಘಟಕ ಅಧ್ಯಕ್ಷೆ ರಮಾ ಎಸ್.ಭಂಡಾರಿ, ಯುವ ವಿಭಾಗ ಅಧ್ಯಕ್ಷ ನಿಶಾನ್ ಆಳ್ವ, ಸಂಚಾಲಕ ಎಚ್. ಸಂಕಪ್ಪ ಶೆಟ್ಟಿ ಮತ್ತಿತರರು ಇದ್ದರು.
ಸಂಘದ ಉಪಾಧ್ಯಕ್ಷ ಡಾ.ಪ್ರಶಾಂತ್ ಮಾರ್ಲ ಸ್ವಾಗತಿಸಿ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ ವಂದಿಸಿದರು. ಬಾಲಕೃಷ್ಣ ಶೆಟ್ಟಿ ಕೊಡಾಜೆ ಮತ್ತು ಕಿಶೋರ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.















