ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆ ಚಾಲನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದದ ಬ್ವಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ.
ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.
ರಾಜ್ಯ ಸರ್ಕಾರದ ಮಹತ್ವದ ಯುವನಿಧಿ ಯೋಜನೆಯ ಅನುಕೂಲ ಪಡೆಯುವವರು ಡಿಸೆಂಬರ್ 26 ರಿಂದ ನೋಂದಣಿ ಮಾಡಿಕೊಳ್ಳಬೇಕಾಗಿದೆ. ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ.ಆನ್ ಲೈನ್ ಮೂಲಕವೂ
ನೋಂದಣಿ ಮಾಡಲು ಅವಕಾಶ ಇದೆ. https://sevasindhugs.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಈ ಯೋಜನೆಯ ಲಾಭ ಪಡೆದುಕೊಳ್ಳುವವರು ಸೇವಾ ಸಿಂಧು ಪೋರ್ಟಲ್ ನಲ್ಲಿ ಮಾಸಿಕವಾಗಿ ನಿರುದ್ಯೋಗ ದೃಢೀಕರಣ ಮಾಡಿಸಿಕೊಳ್ಳಬೇಕು. ತಪ್ಪು ಮಾಹಿತಿ ನೀಡಿದ್ದಲ್ಲಿ ದಂಡ ವಿಧಿಸಲಾಗುತ್ತದೆ.
ಯುವನಿಧಿಗೆ ಯೋಜನೆಗೆ ಅರ್ಹರು ಯಾರು?
* ಪದವಿ, ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕರ್ನಾಟಕದಲ್ಲಿ ವಾಸ ಇರುವವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ.
* ಈ ಸೌಲಭ್ಯವು 2 ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. 2 ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.
* ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
*ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ್ಯ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲರಾದರೆ ದಂಡ ವಿಧಿಸಲಾಗುತ್ತದೆ.














