ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್ನಲ್ಲಿ ಇಂದು ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ (Firecracker Explosion) 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದ ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಇಡೀ ಊರನ್ನು ಆವರಿಸಿತು.
ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ 40 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನ್ಯೂಸ್ 18 ವರದಿ ಮಾಡಿದೆ. ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು. ಸ್ಥಳಕ್ಕೆ ತುರ್ತು ಸೇವೆಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟದ ನಿಖರವಾದ ಕಾರಣವನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.
ಕೇರಳದ ಆರೋಗ್ಯ ಸಚಿವೆ
ವೀಣಾ ಜಾರ್ಜ್ ಅವರು ಪಟಾಕಿ ಸ್ಫೋಟದಲ್ಲಿ ಗಾಯಗೊಂಡವರಿಗೆ ತಕ್ಷಣ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ನಿರ್ದೇಶಿಸಿದ್ದಾರೆ. ಅವರ ಚಿಕಿತ್ಸೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಬೇಕೆಂದು ಅವರು ಸೂಚನೆ ನೀಡಿದ್ದಾರೆ.
ಇಂದು ಮಧ್ಯಾಹ್ನ 3.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಹಲವಾರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ವಿವಿಧ ಸ್ಥಳಗಳಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ. 18 ಜನರನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.














