ತೆಲಂಗಾಣ ಹಾಗೂ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ವರುಣಾರ್ಭಟ,ಹಲವು ಸಾವು- ನೋವು

Coastal Bulletin
ತೆಲಂಗಾಣ ಹಾಗೂ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ವರುಣಾರ್ಭಟ,ಹಲವು ಸಾವು- ನೋವು

ಹೈದರಾಬಾದ್: ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಿಂದ ತೀವ್ರ ಪ್ರವಾಹ ಉಂಟಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನೆರೆಯ ತೆಲಂಗಾಣದಲ್ಲಿ ಸನ್ನದ್ಧ ಸ್ಥಿತಿಯನ್ನು ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದ ಪ್ರಮುಖ ನಗರ ವಿಜಯವಾಡ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಗಳಲ್ಲಿ ನೀರು ಹರಿದು ಜನ ಸಂಚಾರವೂ ಕಷ್ಟವಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಮಳೆಗೆ 8 ಮಂದಿ ಬಲಿಯಾಗಿದ್ದಾರೆ. ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಗುಂಟೂರು ಮತ್ತು ವಿಜಯವಾಡದಲ್ಲಿ ಮಳೆಯು ಭೂಕುಸಿತ ಮತ್ತು ಜಲಾವೃತವಾದ ರಸ್ತೆಗಳಿಗೆ ಕಾರಣವಾಯಿತು.

ಆಂಧ್ರ ಪ್ರದೇಶದಲ್ಲುಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಕನಿಷ್ಠ ಎಂಟು ಮಂದಿ ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುರವಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕುರವಿ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳ ಕ್ಷಿಪ್ರ ಕ್ರಮದಿಂದಾಗಿ ಸುಮಾರು 20 ಕುಟುಂಬಗಳು, ಒಟ್ಟು 100

ಜನರನ್ನು ರಕ್ಷಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಪ್ರತಿಕೂಲ ಹವಾಮಾನದ ಕಾರಣಕ್ಕೆ ಶನಿವಾರದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ರದ್ದುಪಡಿಸಿದ್ದು, ಅವರು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಪ್ರತಿ ಜಿಲ್ಲೆಗಳಿಗೆ ರೂ. 3 ಕೋಟಿಯನ್ನು ಬಿಡುಗಡೆ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರನ್ನು ಕೂಡಲೇ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಾಶಯಗಳ ಗೇಟ್‌ಗಳನ್ನು ತೆರೆಯುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತೆಲಂಗಾಣ ಸರ್ಕಾರವು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಲು ಆದೇಶಿಸಿದೆ.

Leave a Comment