12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

Coastal Bulletin
12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್​ (ಟಾಟಾ ಕನ್ಸಲ್ಟ್ಎನ್ಸಿ ಸರ್ವೀಸಸ್) ಗೆ ಸಮನ್ಸ್ ಜಾರಿ ಮಾಡಿದೆ.

ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಬಗ್ಗೆ ಕಾರಣಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಟಿಸಿಎಸ್ ಅಧಿಕಾರಿಗಳ ಸಭೆಯನ್ನು ಸಹ ಕರೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಟಿಸಿಎಸ್ ಕಂಪನಿ 12 ಸಾವಿರದಷ್ಟು ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವ ಕುರಿತು ಘೋಷಣೆ ಮಾಡಿದೆ ಎನ್ನುವ ಸುದ್ದಿಯನ್ನು ಮಾದ್ಯಮಗಳಲ್ಲಿ ಗಮನಿಸಿದ್ದೇನೆ. ಈ ಬಗ್ಗೆ ವಿವರಣೆಗಳನ್ನು ನೀಡುವಂತೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕಂಪನಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಲಾಡ್ ಹೇಳಿದ್ದಾರೆ.

ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಸಂದರ್ಭದಲ್ಲಿ ಕಂಪನಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ. ಟಿಸಿಎಸ್​​ನಂತಹ ಐಟಿ ಕಂಪನಿಗಳಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯಿತಿ ನೀಡಲಾಗಿದೆಯಾದರೂ, ಕೆಲವೊಂದು ಷರತ್ತುಗಳು ಅನ್ವಯವಾಗುತ್ತವೆ ಎಂದು ತಿಳಿಸಿದ ಸಚಿವ ಲಾಡ್, ಟಿಸಿಎಸ್​​ಗೆ ಕಳೆದ 5 ವರ್ಷಗಳಿಂದಲೂ ಕಾರ್ಮಿಕ ಕಾನೂನಿನ ವಿನಾಯಿತಿಯನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ ಎನ್ನುವ ಮಾಹಿತಿ ಹಂಚಿಕೊಂಡಿದ್ದಾರೆ.

ಕಾರ್ಮಿಕ ಇಲಾಖೆ ಅಧಿಕಾರಿಗಳು ಟಿಸಿಎಸ್ನ ಪ್ರತಿನಿಧಿಗಳಿಗೆ ದೂರವಾಣಿ ಕರೆ ಮಾಡಿ ಸಿಬ್ಬಂದಿ ವಜಾ ಕುರಿತಂತೆ ಮಾಹಿತಿ ನೀಡಲು ತಿಳಿಸಿದ್ದಾರೆ ಎಂದು ಹೇಳಿದ ಸಚಿವ ಸಂತೋಷ್ ಲಾಡ್,

ಟಿಸಿಎಸ್ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲು ಇಷ್ಟಪಟ್ಟಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸ್ಪಷ್ಟಪಡಿಸಿದರು.

ಕೆಲಸದ ಅವಧಿ ಹೆಚ್ಚಳಕ್ಕೆ ಸಹಮತವಿಲ್ಲ: ಕಾರ್ಮಿಕರ ಕೆಲಸ ಅವಧಿಯನ್ನು ಈಗಿರುವ 8 ತಾಸಿನಿಂದ 9 ರಿಂದ 10 ತಾಸಿನ ತನಕ ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ಥಾವನೆಗೆ ತಮ್ಮ ಸಹಮತ ಇಲ್ಲ

ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಇದೇ ವೇಳೆ ತಿಳಿಸಿದರು. ಕೆಲಸದ ಅವಧಿಯನ್ನು 9 ರಿಂದ 10 ಗಂಟೆಗಳ ವರೆಗೆ ಹೆಚ್ಚಿಸುವ ಕ್ರಮ ವೈಜ್ಞಾನಿಕವಾಗಿ ಸಮಂಜಸವಾಗಿಲ್ಲ. ಆದ್ದರಿಂದ ಈ ಸಂಬಂಧ ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಕುರಿತಂತೆ ಪ್ರಸ್ತಾವನೆ ಕಳುಹಿಸಿದೆ. 1961ರ ಕರ್ನಾಟಕ ಶಾಪ್ಸ್ ಮತ್ತು ಎಸ್ಟಾಬ್ಲಿಷ್ಮೆಂಟ್ಸ್ ಕಾಯ್ದೆಗೆ ತಿದ್ದುಪಡಿ ತಂದು, ಕಾರ್ಮಿಕರ ಕೆಲಸದ ಅವಧಿ ದಿನದಲ್ಲಿ 9 ರಿಂದ 10 ತಾಸುಗಳ ಅವಧಿಗೆ ಹೆಚ್ಚಳ ಮಾಡುವ ಕುರಿತಂತೆ ಕಾರ್ಮಿಕ ಸಂಘಟನೆಗಳ ಮುಖಂಡರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಎಂದು ಲಾಡ್ ತಿಳಿಸಿದ್ದಾರೆ.

Leave a Comment