ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಜೋಶಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದು, ದರ್ಶನ್ ವಿಚಾರ ಹಾಗೂ ಮುಡಾ ಆರೋಪದ ವಿಚಾರ ಬಿಡಿ. ಈಗ ಮಹದಾಯಿ ವಿಚಾರದಲ್ಲಿ ಏನು ತೊಂದರೆಯಾಗಿದೆ. ಮಹದಾಯಿ ಯೋಜನೆಗೆ ಅನುಮತಿ ಕೊಡಿಸ್ರಪ್ಪ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹದಾಯಿ ಯೋಜನೆ ಜಾರಿ ಮಾಡಲು ದುಡ್ಡು ಕೊಡಿಸ್ರಪ್ಪ. ಗಣೇಶ ಚತುರ್ಥಿ ಹಬ್ಬದ ದಿನವೇ ವಿಘ್ನ ನಿವಾರಣೆ ಆಗಲಿ. ಇಲ್ಲಿಂದಲೇ ದೀರ್ಘದಂಡ ನಮಸ್ಕಾರ ಹಾಕುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಈ ವಿಚಾರವಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಕೊಲೆ ಆರೋಪಿ ದರ್ಶನ್ ರಾಜಾತಿಥ್ಯ ಗಂಭೀರವಾದದ್ದು. ಅದಕ್ಕಾಗಿ ದರ್ಶನ್ ಮತ್ತು ಟೀಂ ಬೇರೆ ಜೈಲಿಗೆ ಶಿಫ್ಟ್ ಮಾಡಿದ್ದೇವೆ. ಮುಡಾ ಕೇಸ್ ಡೈವರ್ಟ್ ಮಾಡುವುದಕ್ಕೆ ಅದರಲ್ಲಿ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ.
ರೇಣುಕಾಸ್ವಾಮಿ
ಕೊಲೆ ಕೇಸ್ ಗೆ ಸಂಬಂಧಿಸಿ ತನಿಖೆ ಕೊನೆಯ ಹಂತ ತಲುಪಿದ್ದು, ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. 3,991 ಪುಟಗಳಲ್ಲಿ ರೇಣುಕಾಸ್ವಾಮಿ ಕೊಲೆ ಭೀಕರತೆ ಬಯಲಾಗಿದೆ. ಅಲ್ಲದೇ ರೇಣುಕಾಸ್ವಾಮಿ ಪ್ರಾಣ ಭಿಕ್ಷೆ ಬೇಡುತ್ತಿರುವ ಕೆಲ ಫೋಟೋಗಳು ವೈರಲ್ ಆಗಿದೆ. ಇನ್ನು ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿ, ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ. ಇದನ್ನ ಬಿಟ್ಟಿದ್ದೇ ರಾಜ್ಯ ಸರ್ಕಾರ ಎಂದು ಗಂಭೀರ ಆರೋಪ ಮಾಡಿದ್ದರು.















