ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ

Coastal Bulletin
ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ

ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.

ಮುಖ್ಯಾಂಶಗಳು

ಸಚಿವ ಡಿ. ಸುಧಾಕರ್ (65) ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶ

ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಸಚಿವರ ಅಕಾಲಿಕ ನಿಧನ

ನಾಲ್ಕು ಬಾರಿ ಶಾಸಕರಾಗಿದ್ದ ಚಿತ್ರದುರ್ಗದ ಪ್ರಭಾವಿ ರಾಜಕೀಯ ಚತುರನ ಜೀವನ ಪಯಣ ಅಂತ್ಯ

ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಸಿಎಂ ಸಂತಾಪ

ಸಚಿವ ಸುಧಾಕರ್ ಸಾವಿಗೆ ಸಿಎಂ ಸಂತಾಪ ಸೂಚಿಸಿದ್ದು, ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.

ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು

ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಕೌಟುಂಬಿಕ ಹಿನ್ನೆಲೆ

ಸಚಿವ ಡಿ. ಸುಧಾಕರ್ ಅವರು 1961 ಮಾರ್ಚ್28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಇವರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದರೆ, ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪೂರೈಸುವ ಮೂಲಕ ಮುಗಿಸಿದರು. ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು, ನಂತರ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.

ವೈಯಕ್ತಿಕ ಜೀವನದಲ್ಲಿ ಸರಳ ವ್ಯಕ್ತಿತ್ವದ ಇವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಸಚಿವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದೆ.

Leave a Comment