ಮಂಗಳೂರು: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಂಗಳೂರು- ಬೆಂಗಳೂರು ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಇಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಚಾಲನೆ ನೀಡಿದರು.
ಮಂಗಳೂರು ಜಂಕ್ಷನ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಚಲಿಸುವ ಈ ಎಕ್ಸ್ಪ್ರೆಸ್ ರೈಲಿಗೆ ವಿಸ್ಟಾಡೋಮ್ ಬೋಗಿಗಳನ್ನು ಅಳವಡಿಸಲಾಗಿದೆ. ಈ ಮೂಲಕ ರೈಲ್ವೆ ಇಲಾಖೆಯಿಂದ ವಿಸ್ಟಾಡೋಮ್ ಬೋಗಿಗಳುಳ್ಳ ರೈಲು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಪರಿಚಯವಾಗುತ್ತಿದೆ. ರೈಲು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ವೀಕ್ಷಿಸಬಹುದು. ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ
ಬೋಗಿಯಲ್ಲಿ 44 ಆಸನ ಸಾಮರ್ಥ್ಯವಿದೆ. ಒರಗಬಹುದಾದ ಸೀಟ್ ವ್ಯವಸ್ಥೆ ಇದ್ದು, ವಿಶಾಲ ಕಿಟಕಿಗಳಿಂದ ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಛಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ.















