ಬೆಳಗಾವಿ: ಕಾಂಗ್ರೆಸ್ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಭಾಗಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂಬ ಚರ್ಚೆ ಹುಟ್ಟಿಕೊಂಡಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಊಟಕ್ಕೆ ಕರೆದಿದ್ದರು ಅದಕ್ಕಾಗಿ ಹೋಗಿದ್ದೆವು ಎಂದು ಎಸ್.ಟಿ.ಸೋಮಶೇಖರ್ ನನ್ನ ಬಳಿ ಹೇಳಿದ್ದಾರೆ. ಆ ದೃಷ್ಟಿಯಿಂದ ಅವರು ಯಾವುದೇ ರೀತಿಯ ಶಿಸ್ತು ಉಲ್ಲಂಘನೆ ಮಾಡಿಲ್ಲ.
ನಾನು ಕೂಡ ಈಗಾಗಲೇ ಅವರ ಬಳಿ ಮಾತನಾಡಿದ್ದೇನೆ. ನಿನ್ನೆ ಬಿಜೆಪಿ ಧರಣಿಯಲ್ಲೂ ಅವರು ಭಾಗವಹಿಸಿದ್ದರು. ಆದರೂ ನಾನು ಅವರನ್ನು ಕರೆದು ಮಾತನಾಡುತ್ತೇನೆ. ನಮ್ಮ ಸಭೆಗೆ ಬಂದಿದ್ದರು, ನನ್ನ ಕೊಠಡಿಗೂ ಬಂದು ಮಾತನಾಡಿದ್ದಾರೆ ಎಂದು ಹೇಳಿದರು.














