ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶುಕ್ರವಾರ ಸಂಜೆ ನಡೆದಿರುವ ಘಟನೆಯಲ್ಲಿ ದ್ವಾರಕಾ ಪ್ರದೇಶದಲ್ಲಿ ತನ್ನ ಕಚೇರಿಯಲ್ಲಿದ್ದ 60 ವರ್ಷದ ಬಿಜೆಪಿ ನಾಯಕ ಸುರೆಂದರ್ ಕುಮಾರ್ ಅಲಿಯಾಸ್ ಸುರೇಂದರ್ ಮಟಿಯಾಲಾ ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ನಜಾಫ್ಗಢ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ಇವರು ಬಿಜೆಪಿಯ ಕಿಸಾನ್ ಮೋರ್ಚಾ ಅಧ್ಯಕ್ಷರಾಗಿದ್ದರು. ದೆಹಲಿಯ ಬೀಮದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಸುರೇಂದರ್ ಮಟಿಯಾಲಾ ತನ್ನ ಕಚೇರಿಯೊಳಗೆ ಕುಳಿತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿ ಅವರ ಮೇಲೆ ಗುಂಡು ಹಾರಿಸಿದರು. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರು ವ್ಯಕ್ತಿಗಳು ಅವರ ಕಚೇರಿಗೆ ನುಗ್ಗಿ ಇತರರ ಸಮ್ಮುಖದಲ್ಲಿ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡು ಹಾರಿಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಟಿಯಾಲಾ ಅವರ ಎದೆ ಮತ್ತು ಹೊಟ್ಟೆ ಸೇರಿದಂತೆ ಅವರ ದೇಹದ ಮೇಲೆ ನಾಲ್ಕು ಬುಲೆಟ್ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದೂ ದೆಹಲಿ ಪೊಲೀಸರು ಹೇಳಿದ್ದಾರೆ.
ಸುರೇಂದರ್ ಮಟಿಯಾಲ ಅವರು ಕೌನ್ಸಿಲರ್ ಚುನಾವಣೆಗೆ ಸ್ಪರ್ಧಿಸಿದ್ದರು ಮತ್ತು 2020 ರ ವಿಧಾನಸಭಾ ಚುನಾವಣೆಯಲ್ಲಿ ಮಟಿಯಾಲಾದಿಂದ ಬಿಜೆಪಿ ಅಭ್ಯರ್ಥಿಯೂ ಆಗಿದ್ದರು.