ಬೆಂಗಳೂರು : ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪ್ರಭಾವಿ ಒಕ್ಕಲಿಗ ನಾಯಕನಾಗಿರುವ ಪದ್ಮನಾಭನಗರದ ಶಾಸಕ ಆರ್.ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರಾಗಿ ಘೋಷಣೆ ಮಾಡಲಾಗಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅಶೋಕ್ ಹೆಸರನ್ನು ಸೂಚಿಸಿದರೆ, ಶಾಸಕ ಸುನಿಲ್ ಕುಮಾರ್ ಇದಕ್ಕೆ ಅನುಮೋದನೆ ನೀಡಿದರು. ಕೊನೆಗೆ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಹೆಸರಿಗೆ ಅನುಮೋದನೆ ನೀಡಿದರು.ವಿಪಕ್ಷ ನಾಯಕರಾಗಿ ಆರ್ ಅಶೋಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅಶೋಕ್ ಅವರ ಆಯ್ಕೆ ಮೂಲಕ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗಿದೆ. 'ಕಾಂಗ್ರೆಸ್
ದುರಾಡಳಿತ ಜನರ ಮುಂದೆ ಇಡಲಿದ್ದೇವೆ. ಮುಂಬರುವ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸೋಣ. ಒಂದು ಚುನಾವಣೆಯ ಸೋಲಿನಿಂದ ನಾವು ಹೆದರಿ ಕೂರೋದಿಲ್ಲ. ಹೈಕಮಾಂಡ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇವೆ' ಎಂದು ಶಾಸಕಾಂಗ ಸಭೆಯಲ್ಲಿ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಆರ್.ಅಶೋಕ್ ಮಾತನಾಡಿದ್ದಾರೆ. ಅದರೊಂದಿಗೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರನ್ನೂ ಆಯ್ಕೆ ಮಾಡಿದೆ.














