ಚಿಕ್ಕಮಗಳೂರು; ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿಗೆ ಭಾನುವಾರ ಚಾಲನೆ ಸಿಕ್ಕಿದೆ. ಬಿಜೆಪಿ ನಾಯಕ ಸಿ. ಟಿ. ರವಿ ಸೇರಿದಂತೆ ದತ್ತಭಕ್ತರು ಮಾಲೆ ಧಾರಣೆ ಮಾಡುವ ಮೂಲಕ 10 ದಿನಗಳ ದತ್ತಜಯಂತಿ 2023ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ದೊರೆತಿದೆ.
ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಶಾಸಕ ಸಿ. ಟಿ. ರವಿ ಜೊತೆ 300ಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ಮಾಡಿದರು. ಕಳೆದ ವರ್ಷಕ್ಕಿಂತ ಈ ಬಾರಿ ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದತ್ತ ಭಕ್ತರು ಮಾಲೆ ಧರಿಸಿದ್ದಾರೆ.
ಭಾನುವಾರದಿಂದ 10 ದಿನಗಳ ಕಾಲ ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ನಡೆಯಲಿದೆ. ಈ ವೇಳೆ ಶಾಂತಿ, ಸುವ್ಯಸ್ಥೆ ಕಾಪಾಡಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡ ಅಗತ್ಯ ಕ್ರಮಗಳನ್ನು ಕೈಗೊಂಡಿವೆ.
ಈ ಬಾರಿಯ ಶೋಭಾಯಾತ್ರೆಯಲ್ಲಿ 20 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ಡಿಸೆಂಬರ್ 26ರಂದು ರಾಜ್ಯದ ಮೂಲೆ
ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.
ದತ್ತಪೀಠದಲ್ಲಿ 3 ದಿನಗಳ ಕಾಲ ದತ್ತ ಜಯಂತಿ ಹಿನ್ನೆಲೆ ಮುಳ್ಳಯ್ಯನಗಿರಿ- ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 16 ರಿಂದ 20 ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಡಿಸಿ ರಮೇಶ್ ಆದೇಶ ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಬುಕ್ ಆಗಿದ್ರೆ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ ಎಂದು ಹೇಳಲಾಗಿದೆ.














