ಬೆಳಗಾವಿ : 2023ರ ಜನವರಿ 14ರ ಮಕರ ಸಂಕ್ರಾಂತಿಯಿಂದ ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ಸಹ ನೇಕಾರ ಸಮ್ಮಾನ್ ಯೋಜನೆಯಡಿ ವಾರ್ಷಿಕ 5000 ರೂ. ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನೇಕಾರ ಸೇರಿದಂತೆ ಇನ್ನೀತರ ಸಮುದಾಯದ ಮುಖಂಡರು ಡಿಸೆಂಬರ್ 19ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ರೈತರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನ ವಿದ್ಯಾನಿಧಿ ಯೋಜನೆಯ ವ್ಯಾಪ್ತಿಗೆ ನೇಕಾರ ಮಕ್ಕಳನ್ನು ಸಹ ತರಲಾಗಿದೆ. ಜನವರಿ ಮೊದಲ ವಾರದಲ್ಲಿ ವಿದ್ಯಾನಿಧಿ ಸ್ಕಾಲರ್ ಶಿಪ್ ನೀಡಲಾಗುವುದು ಎಂದು ತಿಳಿಸಿದರು.
ಸಾಂಪ್ರದಾಯಿಕ ಉದ್ಯೋಗಗಳಿಗೆ ಪ್ರೋತ್ಸಾಹಿಸುವುದು ದೇಶದ ಆರ್ಥಿಕತೆಯ ಹಿತದೃಷ್ಡಿಯಿಂದ ಅನುಕೂಲಕರ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿಗಳು, ನೇಕಾರರು ಸಹ ಶ್ರಮಜೀವಿಗಳಾಗಿದ್ದಾರೆ. ಬಸವಣ್ಣನವರು ಹೇಳಿದ ಕಾಯಕವೇ
ಕೈಲಾಸ ಎಂಬುದನ್ನು ರೈತರ ಹಾಗೇ ನೇಕಾರರು ಕಾರ್ಯಗತ ಮಾಡುತ್ತಾರೆ. ಇಂತಹ ದುಡಿಯುವ ವರ್ಗದ ಹಿತಕಾಯಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.
ಬೇಡಿಕೆಯಂತೆ ನೇಕಾರರಿಗೆ 2 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ. ನೇಕಾರರಿಗೆ ತಮಿಳುನಾಡಿನ ಮಾದರಿಯಲ್ಲಿ ಉಚಿತ ವಿದ್ಯುತ್ ಕೊಡಲು ಯೋಜಿಸಲಾಗಿದೆ. ಯುನಿಟ್ ವೊಂದಕ್ಕೆ ಈಗ 2 ರೂ. ಇರುವುದನ್ನು ಇದೀಗ 40 ಪೈಸೆಗೆ ಇಳಿಸಿದ್ದೇವೆ. ವೃತ್ತಿಪರ ನೇಕಾರ ಕೆಲಸಗಾರರಿಗೆ ಶೇ.50ರಷ್ಟು ಸಬ್ಸಿಡಿ ದರದಲ್ಲಿ ಸಾಲಸೌಲಭ್ಯ ನೀಡಲಾಗುತ್ತದೆ ಎಂದರು.














