Coastal Bulletin

ಬೆಂಗಳೂರು : ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಗಣೇಶ ಹಬ್ಬ ಆಚರಣೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್‌ ಸಂಪರ್ಕ ಇನ್ನು ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೋಲಿಸ್‌ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚಾರ ಪಡಿಸಬೇಕು. ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸಬೇಕು ರಾಜ್ಯ ಸರ್ಕಾರ ಆದೇಶಿಸಿದೆ.

ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ, ಮಾನ್ಯ ನ್ಯಾಯಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ, ಮುಚ್ಚಳಿಕೆಯನ್ನು ಪಡೆಯಬೇಕು.

ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳುವುದು, ಅಗತ್ಯವಿರುವ ಕಡೆ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. 

ವಿಶೇಷವಾಗಿ ಹೈ ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಬಂಧಿಸಬೇಕು. ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದೆ. ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. 

Leave a Comment